ಬೆಳಗಾವಿ : ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಕ್ಷೇತ್ರದಿಂದ ಕುರುಬರಿಗೆ ಟಿಕೆಟ್ ನೀಡಲು ಚಿಂತನೆ ಮಾಡಿರುವುದಾಗಿ ಹೇಳಿದ್ದೇವೆಯೇ ಹೊರತು ಕೊಡುತ್ತೇವೆ ಎಂದು ಹೇಳಿಲ್ಲ. ಕುರುಬ ಸಮುದಾಯದ ಮುಖಂಡರ ಜೊತೆ ಚರ್ಚಿಸಿ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಜಿಲ್ಲಾ ಉಸ್ತವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಂದಿಲ್ಲಿ ಹೇಳಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಿಂದ ಸ್ಪರ್ಧಿಸಲು ಈಗಾಗಲೇ ಇಬ್ಬರು ಅರ್ಜಿ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ಕುರುಬ ಸಮಾಜದ ಸಮಾವೇಶದಲ್ಲಿ ಬೆಳಗಾವಿಯ ಎರಡು ಲೋಕಸಭಾ ಕ್ಷೇತ್ರಗಳ ಒಂದರಲ್ಲಿ ಕುರುಬ ಸಮಾಜಕ್ಕೆ ಬಿಟ್ಟು ಕೊಡಲಾಗುವದು ಎಂದು ಹೇಳಲಾಗಿತ್ತು. ಅದರ ಕುರಿತು ಆ ಸಮಾಜದ ಮುಖಂಡರೊಂದಿಗೆ ಮಾತನಾಡಲಾಗುವದು ಎಂದು ಸ್ಪಷ್ಟಪಡಿಸಿದರು.

ನಾನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಪಟ್ಟು ಹಿಡಿದಿಲ್ಲ. ಉಪಮುಖ್ಯಮಂತ್ರಿ ಸ್ಥಾನ ನೀಡುವುದು ಪಕ್ಷಕ್ಕೆ ಬಿಟ್ಟ ವಿಷಯ. ನಾವು ದೆಹಲಿಗೆ ಹೋಗಿ ಬಂದಿದ್ದೇವೆ. ಪಕ್ಷ ಹೆಚ್ಚು ಸ್ಥಾನ ಗೆಲ್ಲಲು ಎಲ್ಲರೂ ಸೇರಿ ಶ್ರಮಿಸುತ್ತೇವೆ. ನಾಳೆ ನಾನು ವಿಜಯಪುರಕ್ಕೆ ಹೊರಟಿರುವೆ. ವಿಜಯಪುರ, ಚಿಕ್ಕೋಡಿ, ಬೆಳಗಾವಿ ಲೋಕಸಭಾ ಮತಕ್ಷೇತ್ರದ ಪಟ್ಟಿ ಸಂಗ್ರಹಿಸಿ ಹೈಕಮಾಂಡಿಗೆ ಕಳುಹಿಸಲಾಗುವುದು. ಚುನಾವಣೆಗೆ ಸಾಕಷ್ಟು ಮೊದಲೇ ಅಭ್ಯರ್ಥಿಗಳಿಗೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕೆಲಸ ಮಾಡಲು ತಿಳಿಸಲಾಗಿದೆ ಎಂದು ಹೇಳಿದರು.