ಬೆಳಗಾವಿ: ವಿಶ್ವದಲ್ಲಿಯೇ ಅತೀದೊಡ್ಡ ಪ್ರಜಾಪ್ರಭುತ್ವ ದೇಶವಾಗಿರುವ ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಸಿದ್ಧತೆ ಹಾಗೂ ಪ್ರಕ್ರಿಯೆಗಳನ್ನು ವೀಕ್ಷಿಸಲು ಐದು ರಾಷ್ಟ್ರಗಳ ಚುನಾವಣಾ ಆಯೋಗಗಳ ಪ್ರತಿನಿಧಿಗಳ ಅಂತರ್ ರಾಷ್ಟ್ರೀಯ ತಂಡವು ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿತು.
ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ಸ್ವಾಗತಿಸಿದರು.
ಕಾಂಬೋಡಿಯಾ ದೇಶದ ರಾಷ್ಟ್ರೀಯ ಚುನಾವಣಾ ಮಂಡಳಿಯ ಸದಸ್ಯರಾದ ಹೆಲ್.ಸರಾಥ್. ಮುಖ್ಯ ಕಾರ್ಯದರ್ಶಿ ಹೌಟ್ ಬೋರಿನ್. ಮೊಲ್ಡೊವಾ ದೇಶದ ಕೇಂದ್ರ ಚುನಾವಣಾ ಆಯೋಗದ ಸದಸ್ಯರಾದ ಶ್ರೀಮತಿ ಡಾನಾ ಮಂಟೇನುವಾ, ಸ್ಥಳೀಯ ಜಿಲ್ಲಾ ಚುನಾವಣಾ ಪತಿಷತ್ ಮುಖ್ಯಸ್ಥರಾದ ಆ್ಯಡ್ರಿಯನ್ ಗಮರ್ತಾ ಎಸಾನು. ನೇಪಾಳ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಾದ ದಿನೇಶ್ ಕುಮಾರ್ ಥಾಪಾಲಿಯಾ ಹಾಗೂ ಅಧೀನ ಕಾರ್ಯದರ್ಶಿ ಥಾನೇಶ್ವರ ಬುಸಾಲ್
ಸಿಷೆಲ್ ದೇಶದ ಚುನಾವಣಾ ಆಯೋಗದ ಮುಖ್ಯಸ್ಥರಾದ ಡ್ಯಾನಿ ಸಿಲ್ವಾ ಲುಕಾಸ್ . ಆಯುಕ್ತರಾದ ನೊರ್ಲಿಸ್ ನಿಕೋಲಸ್ ರೋಸ್ ಹೋರೌ. ತುನಿಷಿಯಾ ಎಲೆಕ್ಷನ್ ಹೈಕಮಿಷನ್(ಐಎಸ್ಐಇ) ನ ಮಾನಸ್ರೀ ಮೊಹ್ಮದ್ ತ್ಲಿಲಿ, ಪ್ರಾದೇಶಿಕ ನಿರ್ದೇಶಕರಾದ ಜೆಲ್ಲಾಲಿ ನಬೀಲ್ ಅವರು ಅಂತರ್ ರಾಷ್ಟ್ರೀಯ ನಿಯೋಗದಲ್ಲಿದ್ದಾರೆ.
ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಅಂತರ್ ರಾಷ್ಟ್ರೀಯ ನಿಯೋಗದ ಸಭೆಯಲ್ಲಿ ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಚುನಾವಣಾ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ಬೆಳಗಾವಿ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಢಾಧಿಕಾರಿ ಡಾ.ಭೀಮಾಶಂಕರ ಗುಳೇದ, ಐ.ಎ.ಎಸ್. ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು.
ಇದಾದ ಬಳಿಕ 02-ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ವನಿತಾ ಮಹಾವಿದ್ಯಾಲಯದಲ್ಲಿ ಸ್ಥಾಪಿಸಲಾಗಿರುವ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದ ನಿಯೋಗದ ಸದಸ್ಯರು, ಮಸ್ಟ ರಿಂಗ್ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ಮತಗಟ್ಟೆ ಸಿಬ್ಬಂದಿ ನಿಯೋಜನೆ, ಸ್ಟ್ರಾಂಗ್ ರೂಮ್, ಮತಯಂತ್ರಗಳ ವಿತರಣೆ, ಮತಗ್ಟೆಗೆ ಚುನಾವಣಾ ಅಧಿಕಾರಿ/ಸಿಬ್ಬಂದಿ ತಂಡಗಳ ರವಾನೆ ಹಾಗೂ ಸಾರಿಗೆ ವ್ಯವಸ್ಥೆಯ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮಾದರಿ ನೀತಿಸಂಹಿತೆ(ಎಂಸಿಸಿ) ಪಾಲನೆಯನ್ನು ಖಚಿತಪಡಿಸುವ ಹಿನ್ನೆಲೆಯಲ್ಲಿ ಸ್ಥಾಪಿಸಲಾಗಿರುವ ಎಂಸಿಸಿ ನಿಗಾ ಕೇಂದ್ರಕ್ಕೆ ಅಂತರ್ ರಾಷ್ಟ್ರೀಯ ನಿಯೋಗ ಭೇಟಿ ನೀಡಿತು.
ಚುನಾವಣೆ ಘೋಷಣೆಯಾದ ತಕ್ಷಣವೇ ಮಾದರಿ ನೀತಿಸಂಹಿತೆ ಜಾರಿಗೆ ಬರುತ್ತದೆ. ಮಾದರಿ ನೀತಿಸಂಹಿತೆ ಉಲ್ಲಂಘನೆಗಳನ್ನು ಪತ್ತೆ ಮಾಡಿ ಸೂಕ್ತ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ಸ್ಥಾಪಿಸಲಾಗಿರುವ ಸುಸಜ್ಜಿತ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಲ್ಲಿ ಎಂಸಿಸಿ ತಂಡ ಕಾರ್ಯನಿರ್ವಹಿಸುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.