ಬೆಳಗಾವಿ.: ಬೆಳಗಾವಿ-ಕಿತ್ತೂರ-ಧಾರವಾಡ ರೈಲು ಮಾರ್ಗ ಈ ಭಾಗದ ಜನರ ಬಹು ದಿನಗಳ ಬೇಡಿಕೆ ಹಾಗೂ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಬಾಕಿ ಇರುವ ಭೂಸ್ವಾಧಿನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ಕಾಮಗಾರಿಯನ್ನು ಚುರುಕುಗೊಳಿಸಬೇಕು ಎಂದು ಸಂಸದ ಜಗದೀಶ ಶೆಟ್ಟರ ಅವರಿಂದಿಲ್ಲಿ ಸೂಚಿಸಿದರು.

ಬೆಳಗಾವಿಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ, 73 ಕಿ.ಮೀ. ಉದ್ದದ ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿರುವುದರಿಂದ ಮಾರ್ಗ ಬದಲಾವಣೆ ಕುರಿತು ಚರ್ಚಿಸದೇ ಅಗತ್ಯ ಭೂಸ್ವಾಧೀನಕ್ಕೆ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೇ ರೈತರ ಸಭೆ ಕರೆದು ತುರ್ತಾಗಿ ಪರಿಹಾರ ಕಂಡುಕೊಳ್ಳಬೇಕು. ರೈಲುಮಾರ್ಗ(ಅಲೈನ್ ಮೆಂಟ್) ಬದಲಾವಣೆ ಕುರಿತು ನ್ಯಾಯಾಲಯದ ಆದೇಶದಲ್ಲಿ ಇಲ್ಲ. ಆದ್ದರಿಂದ ಅಗತ್ಯವಿರುವ ಭೂಸ್ವಾಧೀನದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.

900 ಕೋ. ರೂ.ಗಳ ವೆಚ್ಚದ ಬೆಳಗಾವಿ-ಕಿತ್ತೂರು-ಧಾರವಾಡ ರೈಲುಮಾರ್ಗ ನಿರ್ಮಾಣವನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಕಾಮಗಾರಿಗೆ ಒಟ್ಟು ಅಗತ್ಯವಿರುವ 600 ಎಕರೆ ಪೈಕಿ ಧಾರವಾಡದಿಂದ ಬಾಗೇವಾಡಿವರೆಗಿನ 322 ಎಕರೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಳಗಾವಿ ಸಮೀಪದ ಕುರುವಿನಕೊಪ್ಪ ಸೇರಿದಂತೆ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿನ 155 ಎಕರೆ ಭೂಸ್ವಾಧೀನ ಕೆಲಸ ಬಾಕಿಯಿದೆ ಎಂದು ಕೆ.ಆಯ್.ಡಿ.ಬಿ. ವ್ಯವಸ್ಥಾಪಕರು ಮಾಹಿತಿ ನೀಡಿದರು.

ಭೂಸ್ವಾಧೀನಕ್ಕೆ ಅಗತ್ಯವಿರುವ ಪೊಲೀಸ್ ಭದ್ರತೆ ಸೇರಿದಂತೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

 ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು, ಪರಿಹಾರ ಮೊತ್ತವನ್ನು ಕಾಲಮಿತಿಯೊಳಗೆ ಒದಗಿಸಬೇಕು. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ಟೆಂಡರ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.

ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿವಿಧ ಪ್ಯಾಕೇಜಗಳಲ್ಲಿ 500 ಎಕರೆ ಭೂಸ್ವಾಧೀನ ಮಾಡಬೇಕಿತ್ತು. ಅದರಲ್ಲಿ ಈಗಾಗಲೇ 40 ಎಕರೆ ಭೂಸ್ವಾಧೀನಪಡಿಸಿಕೊಳ್ಳಲಾಗಿದೆ. ಜಮೀನು ಭೂಸ್ವಾಧೀನ ಮಾಡಿಕೊಂಡ ಬಳಿಕವೇ ಟೆಂಡರ್ ಪ್ರಕ್ರಿಯೆ ಕೈಗೊಳ್ಳುವುದು ಉತ್ತಮ ಎಂದು ಶೆಟ್ಟರ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ರೈತರ ಜತೆ ಚರ್ಚೆ ನಡೆಸಿ ಮೊದಲ ಪ್ಯಾಕೇಜನ ಭೂಸ್ವಾದೀನ ಪ್ರಕ್ರಿಯೆಯನ್ನು ಎರಡು ತಿಂಗಳೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಎರಡನೇ ಪ್ಯಾಕೇಜ್ ಪ್ರಕ್ರಿಯೆ ಆರಂಭಿಸಬೇಕು ಎಂದು ಸಲಹೆ ನೀಡಿದಾಗ, ಬೆಳಗಾವಿ ರಿಂಗ್ ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು.