ಬೆಳಗಾವಿ:ಬೆಳಗಾವಿ–ಕಿತ್ತೂರು– ಧಾರವಾಡ ರೈಲು ಮಾರ್ಗ ನಿರ್ಮಾಣ ಕಾಮಗಾರಿಗೆ ಭೂ ಸ್ವಾಧೀನ ಪ್ರಕ್ರಿಯೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ, ಆದ್ಯತೆಯ ಮೇರೆಗೆ ಕಾಮಗಾರಿ ಪ್ರಾರಂಭಿಸಲಾಗುವದು ಎಂದು ಕೇಂದ್ರ ರೇಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರಿಂದಿಲ್ಲಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ‘ನೂತನ ರೈಲು ಮಾರ್ಗಕ್ಕೆ ಧಾರವಾಡ ಜಿಲ್ಲೆಯಲ್ಲಿ 42 ಎಕರೆ ಮಾತ್ರ ಸಮಸ್ಯೆಯಾಗುತ್ತಿದೆ. ಅದನ್ನು ಗಂಭೀರವಾಗಿ ಪರಿಗಣಿಸಿ ಸ್ಥಳೀಯರೊಂದಿಗೆ ಆತ್ಮೀಯತೆಯಿಂದ ಚರ್ಚಿಸಿ ಸಮಸ್ಯೆ ಇತ್ಯರ್ಥಕ್ಕೆ ಕ್ರಮ ವಹಿಸಿ’ ಎಂದರು.
ದಿವಂಗತ ಸುರೇಶ ಅಂಗಡಿ ಅವರ ಕನಸಿನ ಯೋಜನೆಯಾದ ಇದು ದಶಕಗಳಿಂದಲೂ ಜನ ಬೇಡಿಕೆ ಇಟ್ಟಿದ್ದಾರೆ. ಇದೇ ಸರ್ಕಾರದ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ’ ಎಂದರು.
ವಿಡಿಯೊ ಸಂವಾದ ನಡೆಸಿದ ಧಾರವಾಡ ಜಿಲ್ಲಾಧಿಕಾರಿ ಜಿ.ಆರ್.ಜಿ. ದಿವ್ಯಪ್ರಭು, ‘ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಹುಬ್ಬಳ್ಳಿ– ಧಾರವಾಡ ವ್ಯಾಪ್ತಿಗೆ 288 ಎಕರೆ ಒಳಪಟ್ಟಿದೆ. ಅಳತೆ ಕಾರ್ಯ ಪ್ರಗತಿಯಲ್ಲಿದೆ. ಅದರಲ್ಲಿ 42 ಎಕರೆ ಭೂಸ್ವಾಧೀನ ಪ್ರಕ್ರಿಯೆ ಸ್ಥಳೀಯ ಸಾರ್ವಜನಿಕರು ಹಾಗೂ ರೈತರಿಂದ ತಡೆ ಹಿಡಿಯಲಾಗಿದೆ’ ಎಂದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಮಾತನಾಡಿ, ‘ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಭೂ ಮಾಪನ ಕಾರ್ಯ ಪೂರ್ಣಗೊಳಿಸಿದಲ್ಲಿ, ಮುಂದಿನ ದಿನಗಳಲ್ಲಿ ರೈಲು ಸಂಚಾರಕ್ಕೆ ಅಡೆತಡೆ ಉಂಟಾಗುವ ಸಾಧ್ಯತೆಗಳಿವೆ. ಹಾಗಾಗಿ ರೈಲ್ವೆ ಅಧಿಕಾರಿಗಳು, ಧಾರವಾಡ ಜಿಲ್ಲಾಧಿಕಾರಿಗಳು ಸ್ಥಳೀಯ ರೈತರೊಂದಿಗೆ ಆತ್ಮೀಯತೆಯಿಂದ ವರ್ತಿಸಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಬೇಕು’ ಎಂದು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ‘ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 600.8 ಎಕರೆ ಜಮೀನು ಇದೆ. ಇದರಲ್ಲಿ ಎರಡು ಭಾಗವಾಗಿ ವಿಂಗಡಣೆ ಮಾಡಲಾಗಿದೆ. 444 ಮತ್ತು 155 ಎಕರೆ ಬೇರ್ಪಡಿಸಲಾಗಿದೆ. ಕಿತ್ತೂರು, ಹುಲಿಕಟ್ಟಿ, ಎಂ.ಕೆ.ಹುಬ್ಬಳ್ಳಿ, ಬೆಳವಡಿ ಮತ್ತು ಕರವಿನಕೊಪ್ಪ ಮಾರ್ಗವಾಗಿ ರೈಲು ಮಾರ್ಗ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ’ ಎಂದರು.
‘155 ಎಕರೆಯಲ್ಲಿ 8 ಗ್ರಾಮಗಳು ಬರುತ್ತವೆ. ಸದ್ಯಕ್ಕೆ 99 ಎಕರೆ ಜಿ.ಎಂ.ಸಿ.ವರದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯದಲ್ಲೇ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು. ಭೂ ಸ್ವಾಧೀನ ಪ್ರಕ್ರಿಯೆಗೆ ಸರ್ಕಾರದಿಂದ ಅನುಮತಿ ಬಂದ ಕೂಡಲೇ ಟೆಂಡರ್ ಕರೆಯಲಾಗುವುದು. ಡಿಸೆಂಬರ್ ಅಂತ್ಯದೊಳಗಾಗಿ ರೈಲು ಮಾರ್ಗಕ್ಕಾಗಿ ಬೇಕಾದ ಭೂಮಿಯ ಶೇ 80ರಷ್ಟು ಭೂಮಿ ಒದಗಿಸಲಾಗುವುದು’ ಎಂದು ಹೇಳಿದರು.
ಜಿ. ಪಂ. ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ, ರೈಲ್ವೆ ವಿಭಾಗೀಯ ನಿರ್ವಾಹಕ ಹರ್ಷ ಕಾರೆ, ಹಿರಿಯ ರೈಲ್ವೆ ವಿಭಾಗೀಯ ನಿರ್ವಾಹಕ ಸಂತೋಷ ಹೆಗಡೆ, ಕಟ್ಟಡ ವಿಭಾಗದ ಮುಖ್ಯ ಎಂಜಿನಿಯರ್‌ ಸದ್ಧರ್ಮದೇವ, ರೈಲ್ವೆ ಅಧಿಕಾರಿಗಳು, ಕೆಐಡಿಬಿ ಅಧಿಕಾರಿಗಳು ಉಪಸ್ಥಿತರಿದ್ದರು.