ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿ ಅಂಗೀಕರಿಸಬೇಕು ಎಂಬ ಬಗ್ಗೆ ಹಿರಿಯ ಕನ್ನಡ ಹೋರಾಟಗಾರ ಅಶೋಕ ಚಂದರಗಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಇದೀಗ ಸ್ವತಃ ಸಚಿವರೆ ಬಲವಾದ ಭರವಸೆ ನೀಡಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು ಬೆಳಗಾವಿ ಮಹಾನಗರ ಪಾಲಿಕೆ ಸ್ವಯಂಪ್ರೇರಿತವಾಗಿ ಅಂಗೀಕರಿಸಬೇಕು. ಇಲ್ಲದಿದ್ದರೆ ಮಹಾನಗರ ಪಾಲಿಕೆಗೆ ಅಂತಿಮ ಎಚ್ಚರಿಕೆ ನೀಡಲಾಗುತ್ತದೆ. ಅಗತ್ಯವಿದ್ದರೆ ಈಗಿನ ಆಡಳಿತ ಮಂಡಳಿಯನ್ನು ಸೂಪರ್ಸೀಡ್ ಮಾಡುವ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸಚಿವರೊಂದಿಗೆ ನಡೆದ ಸಭೆಯ ನಂತರ ಮಾತನಾಡಿದರು. ನಾಲ್ಕು ತಿಂಗಳಿಂದ ಕನ್ನಡ ಸಂಘಟನೆಗಳು ಕರ್ನಾಟಕ ಪರ ಗೊತ್ತುವಳಿಗಾಗಿ ಹೋರಾಟ ನಡೆಸುತ್ತಿವೆ ಈ ಕುರಿತು ಸರ್ಕಾರ ನೇರ ಸೂಚನೆ ನೀಡಬೇಕು ಎಂದು ಮನವಿ ಮಾಡಲಾಗಿದೆ ಎಂದರು.
ಗಡಿ ವಿವಾದ ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿದೆ ಎಂಬ ನೆಪದಲ್ಲಿ ಗೊತ್ತುವಳಿಯನ್ನು ತಡೆಹಿಡಿಯುವುದು ಸರಿಯಲ್ಲ. ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇನ್ನೂ ಆರಂಭವಾಗಿಲ್ಲ. ಆದ್ದರಿಂದ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಗೊತ್ತುವಳಿಯನ್ನು ಪಾಲಿಕೆ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.
ಗೊತ್ತುವಳಿ ಸ್ವೀಕರಿಸದಿದ್ದರೆ ಪಾಲಿಕೆ ಸೂಪರ್ ಸೀಡ್ : ಸಚಿವ
