ಬೆಳಗಾವಿ, ಸೆ.26 : ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಬೆಂಗಳೂರಿಗೆ ಅಲೆದಾಡುವುದನ್ನು ತಪ್ಪಿಸಲು ಸ್ಥಳೀಯ ಮಟ್ಟದಲ್ಲಿ ಜನತಾ ದರ್ಶನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸರಕಾರದ ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ್ ಹುಕ್ಕೇರಿ ಅವರಿಂದಿಲ್ಲಿ ಹೇಳಿದರು.
ನಗರದಲ್ಲಿ ಮಂಗಳವಾರ ಜನತಾ ದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತವು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಆದಾಗ್ಯೂ ಜನರ ಅಲೆದಾಟವನ್ನು ತಪ್ಪಿಸುವುದಕ್ಕಾಗಿ ಮುಖ್ಯಮಂತ್ರಿಗಳ ಆಶಯದಂತೆ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಆಸಿಫ್(ರಾಜು) ಸೇಠ್, ಜನರು ಜನತಾ ದರ್ಶನದಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಿಕೊಳ್ಳುವುದು ಸಾಧ್ಯವಾಗಲಿದೆ. ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಲಭ್ಯವಾಗುವುದರಿಂದ ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ಹದಿನೈದು ದಿನಗಳಿಗೊಮ್ಮೆ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜನತಾ ದರ್ಶನ ನಡೆಸಲಾಗುವುದು. ಜನರ ಅಹವಾಲುಗಳನ್ನು ಸ್ಥಳೀಯವಾಗಿಯೇ ಪರಿಹರಿಸುವುದು ಜನತಾ ದರ್ಶನದ ಉದ್ಧೇಶ. ಇಲ್ಲಿ ಸ್ವೀಕೃತವಾಗುವ ಅರ್ಜಿಗಳು ಐಪಿಜಿಆರ್ ಎಸ್ ಪೋರ್ಟಲ್ ನಲ್ಲಿ ದಾಖಲಿಸಲಾಗುತ್ತದೆ. ಜಿಲ್ಲಾಮಟ್ಟದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡಲಾಗುವುದು. ರಾಜ್ಯ ಸರಕಾರದ ಹಂತದಲ್ಲಿ ಬಗೆಹರಿಸಬಹುದಾದ ಅರ್ಜಿಗಳನ್ನು ಮುಂದಿನ ಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ವಿವರಿಸಿದರು.
ಶಾಸಕರಾದ ಬಾಬಾಸಾಹೇಬ್ ಪಾಟೀಲ, ವಿಶ್ವಾಸ್ ವೈದ್ಯ, ಜಿ.ಪಂ.ಮುಖ್ಯ ಕಾರ್ಯನಿರ್ವಾಣಾಧಿಕಾರಿ ಹರ್ಷಲ್ ಭೋಯರ್, ಅಪರ ಜಿಲ್ಲಾಧಿಕಾರಿ ವಿಜಕುಮಾರ್ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಜಿ. ಪಂ. ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ, ಡಿಸಿಪಿ ರೋಹನ ಜಗದೀಶ್, ಚಿಕ್ಕೋಡಿ ಉಪ ವಿಭಾಗಾಧಿಕಾರಿ ಮಾಧವ ಗಿತ್ತೆ, ಐಎಎಸ್ ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಿದರು. ಇದಲ್ಲದೇ ಸಭಾಭವನದಲ್ಲಿ ಸ್ಥಾಪಿಸಲಾಗಿದ್ದು ಎಂಟು ಕೌಂಟರ್ ಗಳಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿದರು.