ಬೆಳಗಾವಿ, ಅ.10: ಬೆಳಗಾವಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಗಳ ನೇಮಕ ಹಾಗೂ ವೈದ್ಯಕೀಯ ಉಪಕರಣಗಳನ್ನು ಕಲ್ಪಿಸಿಕೊಡುವದಕ್ಕಾಗಿ ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ಶೀಘ್ರ ಕ್ರಮಕೈಕೊಳ್ಳುವದಾಗಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಂದಿಲ್ಲಿ ಭರವಸೆ ನೀಡಿದರು.
ನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಬಿಮ್ಸ್)ಯಲ್ಲಿ ನಡೆದ ಶೈಕ್ಷಣಿಕ ಪ್ರಗತಿ, ಆಸ್ಪತ್ರೆ ಕಟ್ಟಡ ಕಾಮಗಾರಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಗಡಿ ರಾಜ್ಯಗಳಾದ ಗೋವಾ ಮಹಾರಾಷ್ಟ್ರದಿಂದ ಹೆಚ್ಚಾಗಿ ರೋಗಿಗಳು ಬರುತ್ತಿದ್ದಾರೆ. ಆದರೆ ಅವಶ್ಯಕ ಸಿಬ್ಬಂದಿಗಳ ಕೊರತೆಯಿದ್ದು, ನೇಮಕಾತಿಗೆ ಈಗಾಗಲೇ ಸರ್ಕಾರಕ್ಕೆ ಪ್ರಸಾವನೆ ಸಲ್ಲಿಸಲಾಗಿದೆ. ಶೀಘ್ರದಲ್ಲಿಯೇ ನೇಮಕಾತಿ ಮಾಡಿಕೊಳ್ಳಲಾಗುವದು ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಅಭಿಯಾನದಡಿ ಕೇಂದ್ರ ಸರ್ಕಾರದ ಆದೇಶದಂತೆ ತುರ್ತು ಚಿಕಿತ್ಸೆಗಾಗಿ ಎಂಐಸಿಯು, ಐಸಿಯು ಇತ್ಯಾದಿಗಳ ಮೂಲಭೂತ ಸೌಕರ್ಯಗಳ 50 ಬೆಡ್ ಗಳ ತೀವ್ರ ನಿಗ ಘಟಕ ಪ್ರಾರಂಭಿಸಲು ಅನುಮೋದನೆ ದೊರೆತಿದ್ದು, ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾ ಸರ್ಜನ್ ಡಾ. ಆರ್.ವಿ. ಶಿಂಧೆ ಅವರು ಹೇಳಿದರು.
ಬಿಮ್ಸ್ ಮತ್ತು ಜಿಲ್ಲಾಸ್ಪತ್ರೆ ಸೇರಿ 1040 ಬೆಡ್ ಗಳನ್ನು ಹೊಂದಿದೆ. ಆದರೆ ಶಸ್ತ್ರಚಿಕಿತ್ಸಾ ವಿಭಾಗ ಮತ್ತು ತಾಯಿ ಮಕ್ಕಳ ವಿಭಾಗ ಸೇರಿ 3 ಭಾಗಗಳಾಗಿವೆ ಇದರಿಂದ ರೋಗಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ರೋಗಿಗಳಿಗೆ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು 450 ಬೆಡ್ ಗಳ ಬೋಧನಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮಂಜೂರಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗಾಗಲೇ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಕಾಮಗಾರಿ ಪ್ರಾರಂಭಿಸಲಾಗಿದೆ. ಎಂ.ಆರ್.ಐ, ಸಿಟಿ ಸ್ಕ್ಯಾನ್, ಕ್ಷ – ಕಿರಣ, ವಿವಿಧ ರೀತಿಯ ರಕ್ತ ತಪಾಸಣಾ ಪ್ರಯೋಗಾಲಯ, ತುರ್ತು ಚಿಕಿತ್ಸಾ ಘಟಕ ಸೇರಿದಂತೆ ನಿರಂತರ ದಿನದ 24 ಗಂಟೆಗಳ ಕಾಲ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಜಲತ್ಯಾಜ್ಯ ಸಂಸ್ಕರಣಾ ಘಟಕ: ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಜಲ ತ್ಯಾಜ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ. ಘಟಕದ ನಿರ್ವಹಣೆಗಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾರ್ಯಾದೇಶ ನೀಡಲಾಗುವುದು ಎಂದು ಬಿಮ್ಸ್ ಅಧಿಕಾರಿಗಳು ತಿಳಿಸಿದರು.
ಶಾಸಕ ಆಸೀಫ್ (ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಾದ ಸೈಯೀದಾ ಆಫ್ರಿನ್ ಬಾನು ಬಳ್ಳಾರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.