ಬೆಳಗಾವಿ : ಮಹಾನಗರ ಪಾಲಿಕೆ ಸದಸ್ಯ ಅಭಿಜಿತ್ ಜವಳ್ಕರ್ ಅವರ ಬಂಧನ ಇದೀಗ ರಾಜಕೀಯ ತಿರುವ ಪಡೆದುಕೊಂಡಿದ್ದು, ಬಿಜೆಪಿ – ಕಾಂಗ್ರೆಸ್ + ಎಂಇಎಸ್ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಂಧನ ಮತ್ತತು ಪ್ರಸಕ್ತ ವಿದ್ಯಮಾನಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಅವರು ಪಕ್ಷದ ಮಹಾನಗರ ಘಟಕದ ಜಿಲ್ಲಾಧ್ಯಕ್ಷ ಅನಿಲ್ ಬೆನಕೆ ಅವರಿಗೆ ಕರೆ ಮಾಡಿ ಯಾವ ಕಾರಣಕ್ಕೆ ಪಾಲಿಕೆ ಸದಸ್ಯರನ್ನು ಬಂಧಿಸಲಾಗಿದೆ. ಪೊಲೀಸರ ಮೇಲೆ ಯಾರು ಒತ್ತಡ ಹೇರುತ್ತಿದ್ದಾರೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ. ಪೊಲೀಸ್ ಆಯುಕ್ತರನ್ನು ಸಹಾ ಭೇಟಿಯಾಗಿ ಚರ್ಚಿಸಲು ಸಲಹೆ ನೀಡಿದ್ದಾರೆ.
ಅವರನ್ನು ಬಿಡುಗಡೆಗೊಳಿಸದೇ ಇದ್ದರೆ ವಿಧಾನ ಮಂಡಲದ ಅಧಿವೇಶನ ಸಂದರ್ಭದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ ಅವರು ಅಭಿಜಿತ್ ಜವಳ್ಕರ್ ಅವರನ್ನು ಈ ಕೂಡಲೇ ಬಿಡುಗಡೆಗೊಳಿಸದಿದ್ದರೆ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ತೀವ್ರ ಆಕ್ಷೇಪ : ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಾನಗರ ಪಾಲಿಕೆ ಸದಸ್ಯ ಅಭಿಜಿತ್ ಜವಳ್ಕರ್ ಅವರನ್ನು ಹಲ್ಲೆ ಮಾಡಿರುವ ಆರೋಪದಡಿ ಪೊಲೀಸರು ಬಂಧಿಸಿರುವುದು ಸರಿಯಾದ ಕ್ರಮವಲ್ಲ ಎಂದು ಬಿಜೆಪಿ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮಹಾನಗರ ಘಟಕದ ಅಧ್ಯಕ್ಷ ಅನಿಲ್ ಬೆನಕೆ, ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಬಿಜೆಪಿ ನಾಯಕ ಎಂ.ಬಿ.ಜಿರಲಿ ನೇತ್ರತ್ವದಲ್ಲಿ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗ ಜವಳ್ಕರ್ ಅವರನ್ನು ಬಂಧಿಸಿರುವುದು ಸರಿಯಾದ ನಡೆಯಲ್ಲ. ಇದನ್ನು ಗಮನಿಸಿದರೆ ಪೊಲೀಸ್ ಅಧಿಕಾರಿಗಳನ್ನು ಯಾರೋ ನಿಯಂತ್ರಿಸುತ್ತಿದ್ದಾರೆ ಎಂಬ ಅನುಮಾನ ಮೂಡುತ್ತದೆ. ಯಾವುದೇ ರಾಜಕೀಯ ಒತ್ತಡವಿಲ್ಲದೆ ನ್ಯಾಯಯುತವಾಗಿ ಪ್ರಕರಣದ ತನಿಖೆ ನಡೆಸಬೇಕು.ಆಸ್ಪತ್ರೆಯಿಂದ ಬಿಡುಗಡೆಗೊಂಡ ನಂತರ ಜವಳ್ಕರ್ ಅವರನ್ನು ಬಂಧಿಸಲಾಗಿದೆ. ಪೊಲೀಸರು ಸರಿಯಾದ ಪ್ರಕ್ರಿಯೆ ಅನುಸರಿಸಿದ್ದಾರೆ ಎಂದು ಆಯುಕ್ತರು ನೀಡುತ್ತಿರುವ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಬೆಳಗಾವಿಯಲ್ಲಿ ಶಾಂತತೆ ಕದಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಪಾಲಿಕೆಯನ್ನು ಸುಪರ್ ಸೀಡಗೊಳಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಕಾಂಗ್ರೆಸ್ ನಾಯಕರು ಇದರಲ್ಲಿ ನೇರವಾಗಿ ಭಾಗಿಯಾಗಿರುವುದು ಕಂಡು ಬಂದಿದೆ. ಟಿಳಕವಾಡಿ ಪೊಲೀಸ್ ಇನ್ಸ್ಪೆಕ್ಟರ್ ಪರಶುರಾಮ್ ಪೂಜೇರಿ ಅವರನ್ನು ಈ ಕೂಡಲೇ ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು.