ಬೆಂಗಳೂರು : ಬೆಳಗಾವಿ ತಾಲ್ಲೂಕಿನ ಉಚಗಾವಿ ಹಾಗೂ ಸಂತಿಬಸ್ತವಾಡ ಹೋಬಳಿಯ 20 ಕೆರೆಗಳನ್ನು 287.55 ಕೋಟಿ ರೂ.ಗಳಲ್ಲಿ ನಿರ್ಮಿಸುವ ಯೋಜನಾ ವರದಿಗೆ ಹಾಗೂ ಹಿರೇಬಾಗೇವಾಡಿಯ 61 ಕೆರೆಗಳನ್ನು ತುಂಬಿಸುವ ‘ಬಾಗೇವಾಡಿ ಕೆರೆ ತುಂಬಿಸುವ ಯೋಜನೆ’ಯ 519.10 ಕೋಟಿಗಳ ಅಂದಾಜು ಮೊತ್ತದ ಪರಿಷ್ಕೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದ್ದು, ಬಹು ದಿನಗಳ ಬೇಡಿಕೆಯಾಗಿದ್ದ ಕರೆ ತುಂಬಿಸುವ ಯೋಜನೆಗೆ ಮಂಜೂರಾತಿ ನೀಡಲಾಗಿದೆ.

ಕರ್ನಾಟಕ ಸಿವಿಲ್ ಸೇವಾ(ಸಾಮಾನ್ಯ ನೇಮಕಾತಿ)(ತಿದ್ದುಪಡಿ)ನಿಯಮಗಳು, 2024ಕ್ಕೆ ಸಮಬಂಧಿಸಿದಂತೆ ಗೆಜೆಟ್ ಅಧಿಸೂಚನೆ ಹೊರಡಿಸಿದ ನಂತರ ಬರುವ ಆಕ್ಷೇಪಣೆಗಳನ್ನು  ಪರಿಗಣಿಸಿ ರಾಜ್ಯ ಸಿವಿಲ್ ಸೇವೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇಕಡ.2 ರಷ್ಟು ಮೀಸಲಾತಿ ನೀಡಲು ನಿರ್ಧಾರ. ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜು ಮೊ್ತ ರೂ.142.47 ಕೋಟಿ ಗಳಿಗೆ ಆಡಳಿತಾತ್ಮಕ ಅನುಮೋದನೆ.  ರಾಯಚೂರು ವಿಶ್ವವಿದ್ಯಾಲಯ ಆವರಣದಲ್ಲಿ ‘ಕಲ್ಯಾಣ ಕರ್ನಾಟಕ ಮಾನವ ಜಿನೋಮ್ ಅಧ್ಯಯನ ಸಂಸ್ಥೆ’ ನಿರ್ಮಾಣವನ್ನು ರೂ.47.32 ಕೋಟಿಗಳ ಅಂದಾಜು ಮೊತ್ತದಲ್ಲಿ ಕೆಕೆಆರ್ ಡಿ ಬಿ ಅನುದಾನದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.

2023-24 ನೇ ಸಾಲಿಗೆ 93 ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಲ್ಲಿನ 104 ‘ಕರ್ನಾಟಕ ಪಬ್ಲಿಕ್ ಶಾಲೆ’ ಗಳಿಗೆ 60 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕಲಿಕಾ ವಾತಾವರಣ ಅಭಿವೃದ್ಧಿ.  ರಾಯಚೂರು ತಾಲ್ಲೂಕಿನ ಚಿಕ್ಕಮಂಚಾಲಿ ಗ್ರಾಮದ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕಾಗಿ 158.10 ಕೋಟಿ ರೂ.ಗಳ ಯೋಜನೆಗೆ ಅನುಮೋದನೆ.

ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 499 ಕೋಟಿ ರೂ.ಗಳಿಗೆ ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಚಿಕ್ಕಮಗಳೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ವೈದ್ಯಕೀಯ ಕಾಲೇಜು, ಬಾಲಕ ಬಾಲಕಿಯರ ಹಾಸ್ಟೆಲ್, ಬೋಧಕ ಮತ್ತು ಬೋಧಕೇತರ ಹಾಸ್ಟೆಲ್, ಸಿಬ್ಬಂದಿಗಳ ವಸತಿ ನಿಲಯಗಳ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ಅಂದಾಜು ಮೊತ್ತ 455 ಕೋಟಿ ರೂ.ಗಳಿಗೆ ಅಡಳಿತಾತ್ಮಕ ಅನುಮೋದನೆ ನೀಡಲಾಗಿದೆ.  ರಾಜ್ಯದ ಸಹಕಾರ ಸಂಘಗಳ ಮೂಲಕ ರೈತರು ಸಾಲ ಪಡೆದು 31-12-2023 ಕ್ಕೆ ಸುಸ್ತಿಯಾಗಿರುವ  ಮಧ್ಯಾಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಒಟ್ಟು 440.20 ಕೋಟಿ ರೂ.ಗಳ ಬಡ್ಡಿ ಮನ್ನಾ ಮಾಡುವ ಸಂಬಂಧ ಹೊರಡಿಸಿದ್ದ 20-01-2024ರ ಸರ್ಕಾರಿ ಅದೇಶಕ್ಕೆ ಘಟನೋತ್ತರ ಅನುಮೋದನೆಯನ್ನು ನೀಡಲಾಗಿದೆ