ಬೆಳಗಾವಿ : ಗಡಿನಾಡು ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಕೆಎಲ್ಇ ಸಂಸ್ಥೆಯು ಮತ್ತೊಂದು ಮೈಲ್ಲುಗಲ್ಲಿಗೆ ಸಾಕ್ಷಿಯಾಗುತ್ತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ನೇತೃತ್ವದಲ್ಲಿ ಹಾಗೂ ಆಡಳಿತ ಮಂಡಳಿಯವರ ಇಚ್ಛಾಶಕ್ತಿಯಂತೆ ಆಂಗ್ಲ ಮಾಧ್ಯಮದ ಕೆಎಲ್ಇ ಸ್ಕೂಲ್ ಬುಧವಾರ ದಿನಾಂಕ 28 ರಂದು ಮುಂಜಾನೆ 10.30 ಗಂಟೆಗೆ ಲೋಕಾಎದಪಣೆಗೊಳ್ಳಲಿದೆ.
ಕೆಎಲ್ ಇ ಸಂಸ್ಥೆ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಕೇಂದ್ರ ವಿದೇಶಾಂಗ ಸಚಿವ ಪದ್ಮಭೂಷಣ ಡಾ.ಎಸ್.ಜೈಶಂಕರ ಉದ್ಘಾಟನೆ ನೆರವೇರಿಸಲಿದ್ಮಾದು, ಮುಖ್ಯ ಅತಿಥಿಗಳಾಗಿ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ ಜೋಶಿ ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರು ಮತ್ತು ಕರ್ನಾಟಕ ಸರ್ಕಾರದ ದೆಹಲಿ ಎರಡನೇ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಾಸಕ ಗಣೇಶ ಹುಕ್ಕೇರಿ, ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆ, ಚಿಕ್ಕೋಡಿ ಪುರಸಭೆಯ ಮಾಜಿ ಅಧ್ಯಕ್ಷ ಪ್ರವೀಣ ಕಾಂಬಳೆ ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕೆಎಲ್ಇ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಎಸ್. ಕೌಜಲಗಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಕೆಎಲ್ಇ ಸ್ಕೂಲ್, ಚಿಕ್ಕೋಡಿ,1916 ರಲ್ಲಿ ಸ್ಥಾಪನೆಗೊಂಡ ಕೆಎಲ್ಇ ಸಂಸ್ಥೆಯು ಶೈಕ್ಷಣಿಕ, ಆರೋಗ್ಯ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಜಾಗತಿಕ ಮನ್ನಣೆಗೆ ಪಾತ್ರವಾಗಿದೆ. 1,38,000 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದು, 18,000 ಸಿಬ್ಬಂದಿ ವರ್ಗದವರು ಸೇವೆ ಸಲ್ಲಿಸುತ್ತಿದ್ದಾರೆ. ಶಿಶುವಿಹಾರದಿಂದ ಸ್ನಾತಕೋತ್ತರವರೆಗೆ ಶಿಕ್ಷಣವನ್ನು ನೀಡಿ ಅಗಾಧವಾಗಿ ಬೆಳೆದು ನಿಂತಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಕೇಂದ್ರವಾಗಿಟ್ಟುಕೊಂಡು ಅಂಕಲಿ, ನಿಪ್ಪಾಣಿ, ಹಾವೇರಿ, ಸವದತ್ತಿ, ಅಥಣಿ, ಗದಗ, ಗೋಕಾಕ, ಮಾಲೂರ, ಗಳತಗಾ, ಕೇರೂರ ಅಸಂಖ್ಯ ಗ್ರಾಮೀಣ ಪ್ರದೇಶಗಳಲ್ಲಿಯೇ ಕನ್ನಡ ಮತ್ತು ಆಂಗ್ಲಮಾಧ್ಯಮ ಶಾಲೆಗಳನ್ನು ಹುಟ್ಟುಹಾಕಿ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ಅಂತರಾಷ್ಟ್ರೀಯ ಮಟ್ಟದ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ.
ಕರ್ನಾಟಕ, ಮಹಾರಾಷ್ಟ್ರದಲ್ಲಿ 15 ಸಿಬಿಎಸ್ಸಿ ಶಾಲೆಗಳನ್ನು, 7 ರಾಜ್ಯ ಪಠ್ಯಕ್ರಮದ ಆಂಗ್ಲಮಾಧ್ಯಮ ಶಾಲೆಗಳನ್ನು ಕೆಎಲ್ಇ ಸಂಸ್ಥೆಯು ಮುನ್ನಡೆಸುತ್ತಿದೆ. ಈ ಶಾಲೆಗಳಲ್ಲಿ ಒಟ್ಟು 21,೦೦೦ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಚಿಕ್ಕೋಡಿಯ ಕೆಎಲ್ಇ ಸ್ಕೂಲ್ 2020 ರಲ್ಲಿ ಪ್ರಾರಂಭಗೊಂಡಿತು. 5 ಎಕರೆ ನಿವೇಶನದಲ್ಲಿ 1,೦5,೦೦೦ ಚ.ಅಡಿ ವಿಸ್ತೀರ್ಣದಲ್ಲಿ ಪ್ರಸ್ತುತ ಭವ್ಯವಾದ ಶಾಲೆಯ ಕಟ್ಟಡವನ್ನು 18 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ವಿಶೇಷವಾದ ಹೈಟೆಕ್ ವರ್ಗಕೋಣೆಗಳಿವೆ. ಕಂಪ್ಯೂಟರ್ ಪ್ರಯೋಗಾಲ, ಗ್ರಂಥಾಲಯ, ಕ್ರೀಡಾ ವಿಭಾಗ, ಸಂಗೀತ ತರಬೇತಿ ಹಾಗೂ ಉದ್ಯಾನವನವನ್ನು ಹೊಂದಿದೆ. ಸುತ್ತಮುತ್ತಲಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯವನ್ನು ಒದಗಿಸಲಾಗಿದೆ. ಆವರಣದಲ್ಲಿ ಸಿಸಿಟಿವಿ ಕ್ಯಾಮರಾಗಳು, ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾದ ಶೌಚಾಲಯಗಳನ್ನು ಒದಗಿಸಲಾಗಿದೆ. ಪ್ರಸ್ತುತ ಶಾಲೆಯಲ್ಲಿ ನರ್ಸರಿಯಿಂದ 8 ನೇ ತರಗತಿಯ ವರೆಗೆ 4 ೦೦ ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 5೦ ಕ್ಕೂ ಅಧಿಕ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಬಿ ಜಿ ದೇಸಾಯಿ, ಡಾ. ಪ್ರೀತಿ ದೊಡವಾಡ, ಡಾ ದೀಪಾ ಮೆಟಗುಡ ಹಾಗೂ ಡಾ. ಸುನೀಲ ಜಲಾಲಪೂರೆ ಉಪಸ್ಥಿತರಿದ್ದರು.