ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ(30) ಎಂಬುವವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್ ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. ತಕ್ಷಣ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಎರಡು ಸುತ್ತು ಗುಂಡಿನ ದಾಳಿ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ದಾಳಿ ಮಾಡಿದವರು ಯಾರು.? ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬ ಕುರಿತು ಪೊಲೀಸ್ ತನಿಖೆಯಿಂದಲೇ ಗೊತ್ತಾಗಬೇಕಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
