ಘಟಪ್ರಭಾ: ಯಾರೇ ತಿಪ್ಪರಲಾಗ ಹಾಕಿದರೂ ಗೋಕಾಕ ಜಿಲ್ಲೆ ರಚನೆ ಆಗೇ ಆಗುತ್ತದೆ. ಜಿಲ್ಲಾ ಕೇಂದ್ರದ ಘೋಷಣೆಗೆ ಗೋಕಾಕ ರೋಡ್ ರೈಲು ನಿಲ್ದಾಣ ಹೆಚ್ಚಿನ ಬಲ ತುಂಬಲಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರಿಂದಿಲ್ಲಿ ಹೇಳಿದರು.
ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ 17 ಕೋಟಿ ರೂ.ಗಳ ವೆಚ್ಚದಲ್ಲಿ ಪುನರಾಭಿವೃದ್ದಿಗೊಂಡ ಗೋಕಾಕ ರೋಡ್ ರೈಲ್ವೆ ನಿಲ್ದಾಣದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,
ದೇಶದ 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 86 ಜಿಲ್ಲೆಗಳ ರೈಲು ನಿಲ್ದಾಣಗಳು ಅಭಿವೃದ್ಧಿ ಹೊಂದಿದ್ದು, ರಾಜ್ಯದ ಬೆಳಗಾವಿ ಜಿಲ್ಲೆ ಸೇರಿದಂತೆ ಧಾರವಾಡ, ಬಾಗಲಕೋಟೆ, ಗದಗ್, ಮುನಿರಾಬಾದ್ ಜಿಲ್ಲೆಯ ರೈಲು ನಿಲ್ದಾಣಗಳು ಈ ಭಾಗದ ಜನರಿಗೆ ಅತ್ಯಂತ ಅನುಕೂಲಕರವಾಗಿವೆ ಎಂದರು.
ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ಅತಿ ಶೀಘ್ರದಲ್ಲಿ ಸಂಚಾರ ಆರಂಭಿಸಲಿದೆ. ಜೊತೆಗೆ ಬೆಳಗಾವಿ ಮಿರಜ್ ನಡುವೆ ಜನ ಸಾಮಾನ್ಯರ ಪ್ರಯಾಣಕ್ಕಾಗಿ ಮೆಮೊ ರೈಲು ಸಂಚಾರಕ್ಕೆ ಬೇಡಿಕೆ ಇಟ್ಟಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಗೋಕಾಕ ರೋಡ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಹೊಸ ನಿಲ್ದಾಣದ ಕಟ್ಟಡ, ಪಾರ್ಕಿಂಗ್‌ ಮತ್ತು ಸುಗಮ ವಾಹನ ಸಂಚಾರ ಪ್ರದೇಶ, ಹೊಸ ಪಾದಚಾರಿ ಸೇತುವೆ, ನವೀಕರಿಸಿದ ಶೌಚಾಲಯಗಳು, ಲಿಫ್ಟ್ ಗಳು, ವಿಶಾಲವಾದ ಕಾಯುವ ಕೋಣೆ, ಬೆಳಕು ಮತ್ತು ಡಿಜಿಟಲ್ ಮಾಹಿತಿ ವ್ಯವಸ್ಥೆ ಟಿಕೆಟ್ ಕೌಂಟರ್‌ಗಳು ಮತ್ತು ಕುಡಿಯುವ ನೀರಿನ ಸೌಲಭ್ಯಗಳನ್ನು ನೀಡಲಾಗಿದೆ. ಈ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್. ಎಂ. ಪಾಟೀಲ, ನೈರುತ್ಯ ರೈಲ್ವೆ ವಲಯದ ಮುಖ್ಯ ಕಮರ್ಷಿಯಲ್ ಮ್ಯಾನೇಜರ ಡಾ. ಅನೂಫ್ ಸಾಧು, ಡಿ.ಆರ್.ಯು.ಸಿ.ಸಿ ಸದಸ್ಯ ಫಕೀರಗೌಡ ಸಿದ್ದನಗೌಡರ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಸ ಪಾಟೀಲ, ಗಣ್ಯರಾದ ರಾಮಣ್ಣ ಹುಕ್ಕೇರಿ, ರಾಜು ಕತ್ತಿ, ಸುರೇಶ ಪಾಟೀಲ, ಮಾರುತಿ ವಿಜಯನಗರ, ಮಹ್ಮದ ಗೌಸ್ ಬಾಗೇವಾಡಿ, ಹಿರಿಯ ವಿಭಾಗೀಯ ಸುರಕ್ಷಾ ನೀರಿಕ್ಷಕ ಡಾ. ಕಾರ್ತಿಕ, ಬೆಳಗಾವಿ ವಿಭಾಗದ ಕಮರ್ಷಿಯಲ್ ಮ್ಯಾನೇಜರ ಭೀಮಪ್ಪ ಮೇದಾರ, ರವೀಂದ್ರ ಮಾದರ, ಅಮರ ಬಡೋದೆ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.