ದಾವಣಗೆರೆ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ  ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.

ಭಾರತದ ಅತ್ಯಂತ ಹಿರಿಯ ಶಾಸಕರಾಗಿ ಗುರುತಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ಅವರು,  ಜೂನ್ 16, 1931 ರಂದು ದಾವಣಗೆರೆಯಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದರು. ರಾಜಕೀಯ, ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಾಪೂಜಿ ಸಂಸ್ಥೆ ಕಟ್ಟಿದ ಶಿವಶಂಕರಪ್ಪ

ಶಿವಶಂಕರಪ್ಪನವರು ಶಾಮನೂರು ಕಲ್ಲಪ್ಪ (ಅಥವಾ ಮಾನ್ ಕಲ್ಲಪ್ಪ) ಮತ್ತು ಸಾವಿತ್ರಮ್ಮ (ಅಥವಾ ಸಾವಿತ್ರಮಣ) ಅವರ ಎರಡನೇ ಮಗ. ದಾವಣಗೆರೆಯಲ್ಲಿ ತಮ್ಮ ಶಾಲಾ -ಕಾಲೇಜು ಶಿಕ್ಷಣ ಪೂರೈಸಿದ ನಂತರ, ಅವರು ಉದ್ಯಮ ಮತ್ತು ಸಾರ್ವಜನಿಕ ಜೀವನದಲ್ಲಿ ತಮ್ಮನ್ನ ತೊಡಗಿಸಿಕೊಂಡರು. ಉದ್ಯಮಿಯಾಗಿ, ಶಿವಶಂಕರಪ್ಪನವರು ಬಾಪೂಜಿ ಎಜುಕೇಷನಲ್ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದಾರೆ. ಈ ಸಂಸ್ಥೆಯ ಅಡಿಯಲ್ಲಿ ಬಾಪೂಜಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿ ಮುಂತಾದ ಅನೇಕ ಶೈಕ್ಷಣಿಕ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಅಲ್ಲದೇ, ಅವರು ಸಕ್ಕರೆ ಕಾರ್ಖಾನೆಗಳು ಮತ್ತು ಡಿಸ್ಟಿಲರಿಗಳನ್ನು ಒಳಗೊಂಡಿರುವ ಶಾಮನೂರು ಗ್ರೂಪ್‌ನ ಮುಖ್ಯಸ್ಥರಾಗಿದ್ದಾರೆ.

1969 ರಲ್ಲಿ ದಾವಣಗೆರೆ ಪುರಸಭೆ ಸದಸ್ಯರಾಗಿ ರಾಜಕೀಯ ಪ್ರವೇಶ ಆರಂಭವಾಯಿತು. 1971 ರಲ್ಲಿ ಪುರಸಭೆ ಅಧ್ಯಕ್ಷರಾದರು. ದಶಕಗಳ ಕಾಲ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಖಜಾಂಚಿಯಾಗಿ ಸೇವೆ ಸಲ್ಲಿಸಿದ ಇವರು, ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

1994 ರಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2023 ರಲ್ಲಿ ನಡೆದ ಚುನಾವಣೆಯಲ್ಲಿ 57.59% ಮತಗಳೊಂದಿಗೆ ತಮ್ಮ 6ನೇ ಅವಧಿಗೆ ಆಯ್ಕೆಯಾದರು. ಬಿಜೆಪಿ ಅಭ್ಯರ್ಥಿ ಬಿ.ಜಿ. ಅಜಯ್ ಕುಮಾರ್ ಅವರನ್ನು 27,888 ಮತಗಳ ಅಂತರದಿಂದ ಸೋಲಿಸಿದ್ದರು. ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ ಕೂಡ ದಾವಣಗೆರೆ ಉತ್ತರ ಕ್ಷೇತ್ರದಿಂದ ಶಾಸಕರಾಗಿ ಮತ್ತು ಸಚಿವರಾಗಿ ಆಯ್ಕೆಯಾಗಿದ್ದಾರೆ. ಸೊಸೆ ಪ್ರಭಾ ಮಲ್ಲಿಕಾರ್ಜುನ ಅವರು ಈಗ ಸಂಸದರಾಗಿದ್ದಾರೆ.