ಬೆಳಗಾವಿ, ಜೂ.24: ಬಸವಕಲ್ಯಾಣದಲ್ಲಿ ಜೂನ್ 28ರಂದು ನಡೆಯಲಿರುವ ‘ಬಸವಾದಿ ಶರಣರ ಹಿಂದೂ ಸಮಾವೇಶ’ಕ್ಕೆ ಅನುಮತಿ ನೀಡಬಾರದು ಹಾಗೂ ಕಾರ್ಯಕ್ರಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಬಸವಪರ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಮನವಿಯಲ್ಲಿ, ಕೆಲವು ಧಾರ್ಮಿಕ ಮುಖಂಡರು ಲಿಂಗಾಯತ ಸಮಾಜ, ಬಸವಾದಿ ಶರಣರು ಹಾಗೂ ಮಠಾಧೀಶರ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವುದಾಗಿ ಆರೋಪಿಸಿ, ಇಂತಹ ಹಿನ್ನೆಲೆಯಲ್ಲೇ ಬಸವಕಲ್ಯಾಣದಲ್ಲಿ ಸಮಾವೇಶ ಆಯೋಜನೆ ಮಾಡುವುದು ಸಮಾಜದಲ್ಲಿ ಗೊಂದಲ ಮತ್ತು ಅಶಾಂತಿಗೆ ಕಾರಣವಾಗಬಹುದು ಎಂದು ತಿಳಿಸಲಾಗಿದೆ.
ಬಸವಣ್ಣನವರ ಕಾರ್ಯಭೂಮಿಯಾಗಿರುವ ಬಸವಕಲ್ಯಾಣವು ಅನುಭವ ಮಂಟಪದ ನೆಲೆಯಾಗಿದ್ದು, ಅಲ್ಲಿ ನಡೆಯಲಿರುವ ಈ ಸಮಾವೇಶವು ಬಸವ ತತ್ವಗಳಿಗೆ ವಿರುದ್ಧವಾಗಿದೆ ಎಂದು ಸಂಘಟನೆಗಳ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ. ಕಾರ್ಯಕ್ರಮದಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಸರ್ಕಾರ ಮಧ್ಯಪ್ರವೇಶಿಸಿ ಅನುಮತಿ ನಿರಾಕರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಲ್ಲಿಸಲಾದ ಮನವಿಯಲ್ಲಿ ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಾಮಾಜಿಕ ಸಾಮರಸ್ಯ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಮನವಿ ಸಲ್ಲಿಕೆ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷ ಬಸವರಾಜ ರೊಟ್ಟಿ , ಪ್ರಧಾನ ಕಾರ್ಯದರ್ಶಿ ಅಶೋಕ್ ಮಳಗಲಿ ನಗರ ಅಧ್ಯಕ್ಷ ಎಸ್ಸಿ.ಜಿ.ಸಿದ್ನಾಳ, ಶಂಕರ ಗುಡಸ್, ಪ್ರೇಮಾ ಅಂಗಡಿ, ಬೆಂಡಿಗೇರಿ ರಾಷ್ಟ್ರೀಯ ಬಸವದಳ, ಲಿಂಗಾಯತ ಕ್ಷೇಮಾಭಿವೃದ್ಧಿ ಸಂಘ ಸೇರಿದಂತೆ ವಿವಿಧ ಬಸವಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
