ಬೆಳಗಾವಿ, : ಸ್ವಾತಂತ್ರ್ಯ ಹೋರಾಟದ ಬೆಳ್ಳಿಚುಕ್ಕಿ ಚನ್ನಮ್ಮನ ಕಿತ್ತೂರಿನಲ್ಲಿ ವಿಜಯಜ್ಯೋತಿಯನ್ನು ಸಡಗರ-ಸಂಭ್ರಮದಿಂದ ಬರಮಾಡಿಕೊಂಡು ನಂದಿ ಧ್ವಜಾರೋಹಣ ನೆರವೇರಿಸುವ ಮೂಲಕ ಕಿತ್ತೂರು ಉತ್ಸವ-2023 ಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು, ರಾಜ್ಯದಾದ್ಯಂತ ಸಂಚರಿಸಿ ಇಂದು ಬೆಳಿಗ್ಗೆ ಚನ್ನಮ್ಮನ ಕಿತ್ತೂರಿಗೆ ಆಗಮಿಸಿದ “ವಿಜಯಜ್ಯೋತಿ”ಗೆ ಪೂಜೆ ಸಲ್ಲಿಸಿ ಸ್ವಾಗತಿಸಿಕೊಂಡರು.
ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ: ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ಬಾಬಾಸಾಹೇಬ್ ಪಾಟೀಲ, ಮಹಾಂತೇಶ ಕೌಜಲಗಿ, ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಅವರು ಸೇರಿದಂತೆ ಗಣ್ಯರು ಚನ್ಮಮ್ಮಳ, ಅಮಟೂರು ಬಾಳಪ್ಪ ಹಾಗೂ ಸಂಗೊಳ್ಳಿ ರಾಯಣ್ಣನ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.
ಗಮನಸೆಳೆದ ಕಲಾವಾಹಿನಿ ಮೆರವಣಿಗೆ: ಕನ್ನಡ ನಾಡಿನ ಕಲಾ ವೈಭವವನ್ನು ಪ್ರತಿಬಿಂಬಿಸುವ ವಿವಿಧ ಕಲಾತಂಡಗಳ ಕಲಾವಾಹಿನಿ ಮೆರವಣಿಗೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಚಾಲನೆ ನೀಡಿದರು.
ಪೂರ್ಣಕುಂಭ ಹೊತ್ತ ನೂರಾರು ಮಹಿಳೆಯರು, ಡೊಳ್ಳುಕುಣಿತ, ಗೊಂಬೆಕುಣಿತ, ಕುದುರೆಕುಣಿತ, ಲಂಬಾಣಿ ನೃತ್ಯ, ಝಾಂಜ್ ಪಥಕ್, ಜನಪದವಾದ್ಯಗಳಾದ ಚಂಡಿಮೇಳ, ನಗಾರಿ, ಕಥಕ್ಕಳಿ ತಂಡಗಳು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಒನಕೆ ಓಬವ್ವ ವೇಷಧಾರಿ ಮಕ್ಕಳು ಜನಪದ ಕಲಾವಾಹಿನಿ ಮೆರವಣಿಗೆಯ ಸೊಬಗು ಹೆಚ್ಚಿಸಿದರು. ಮೆರವಣಿಗೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಉಚಿತವಾಗಿ ಆಕರ್ಷಕ ಹಳದಿ ಪೇಟವನ್ನು ತೊಡಿಸಲಾಯಿತು.
ಜನಾಕರ್ಷಿಸಿದ ವಸ್ತುಪ್ರದರ್ಶನ ಮಳಿಗೆಗಳು: ಕೋಟೆ ಆವರಣದೊಳಗೆ ಸ್ಥಾಪಿಸಲಾಗಿರುವ ವಸ್ತುಪ್ರದರ್ಶನ ಮೇಳವನ್ನು ಶಾಸಕ ಬಾಬಾಸಾಹೇಬ್ ಪಾಟೀಲ ಅವರು ಉದ್ಘಾಟಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ತದ ವತಿಯಿಂದ 128 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಕೃಷಿ, ಆರೋಗ್ಯ, ಮೀನುಗಾರಿಕೆ, ಪಶುಪಾಲನೆ, ಗ್ರಾಮೀಣಾಭಿವೃದ್ದಿ, ಕೃಷಿ ಯಂತ್ರೋಪಕರಣ ಸೇರಿದಂತೆ ವಿವಿಧ ಮಳಿಗೆಗಳನ್ನು ಗಣ್ಯರು ವೀಕ್ಷಿಸಿದರು. ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನವನ್ನು ಸಂಸದರಾದ ಮಂಗಲ ಅಂಗಡಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಜಿ. ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹರ್ಷಲ್ ಭೋಯರ್, ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸತ್ಯನಾರಾಯಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ್ ಕೋಣಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಮತ್ತಿತರರು ಉಪಸ್ಥಿತರಿದ್ದರು.